ಕುಂದಾಪುರ: ರಾಘವೇಂದ್ರ ಶೇರುಗಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮೂಲದವರು ಎನ್ನಲಾದ ಇಬ್ಬರು ಆರೋಪಿಗಳಿಗೆ 14ದಿನ ನ್ಯಾಯಾಂಗ ಬಂಧನ ವಿಧಿಸಿ ಕುಂದಾಪುರ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿವಮೊಗ್ಗ ಮೂಲದ ಶಫಿವುಲ್ಲಾ(40) ಹಾಗೂ ಇಮ್ರಾನ್ (43) ಬಂಧಿತ ಆರೋಪಿಗಳು. ಅಕ್ಟೋಬರ್ 6ರಂದುಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ 2ನೇ ಹೆಚ್ಚುವರಿ ಸಿವಿಲ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಕ್ಕೆ ಪೊಲೀಸರು ಮನವಿ ಮಾಡಿರುವ ಹಿನ್ನೆಲೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಸೋಮವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಕುಂದಾಪುರ ಸಾರ್ವಜನಿಕ ಅಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿಗಳಿಗೆ 14ದಿನ ನ್ಯಾಯಾಂಗಬಂಧನ ವಿಧಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಘಟನೆ ಹಿನ್ನೆಲೆ: ರಾಘವೇಂದ್ರ ಶೇರುಗಾರ್ ರವಿವಾರ ಸಂಜೆ ಸುಮಾರಿಗೆ ತಮ್ಮ ಕಾರಿನಲ್ಲಿ ಕುಂದಾಪುರದ ಚಿಕನ್ ಸಾಲ್ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ, ಇನ್ನೊಂದು ಕಾರಿನಲ್ಲಿ ಬಂದಿದ್ದ ವ್ಯಕ್ತಿಯೋರ್ವ ಕಾರು ಸೈಡ್ ಕೊಡುವ ವಿಚಾರದಲ್ಲಿ ತಗಾದೆ ತೆಗೆದು, ಬಳಿಕ ರಾಘವೇಂದ್ರ ಅವರ ತೊಡೆಗೆ ಚೂರಿ ಇರಿದು ಪರಾರಿಯಾಗಿದ್ದನು. ಘಟನೆ ನಡೆದ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಬಂಧನಕ್ಕೆ ಶೋಧ ನಡೆಸಿದ್ದರು. ಉಡುಪಿ ಎಸ್.ಪಿ ಡಾ.ಅರುಣ್ ಕೆ ಅವರು ಮೂರು ವಿಶೇಷ ತನಿಖಾ ತಂಡ ರಚಿಸಿ, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದರು. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಹಾಗೂ ಇತರ ಪ್ರಮುಖ ದಾಖಲೆಗಳನ್ನು ಕಲೆ ಹಾಕಿದ ಪೊಲೀಸರು ಶಿವಮೊಗ್ಗ ಬೆಂಗಳೂರು ಸಹಿತ ವಿವಿದೆಡೆ ತೆರಳಿ ಶಿವಮೊಗ್ಗ ಮೂಲದವರು ಎನ್ನಲಾದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.
