
ಮಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶದ ಕಾವು ಕ್ಷಣಕ್ಷಣಕ್ಕೂ ಹೆಚ್ಚುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮತ ಎಣಿಕಾ ಕೇಂದ್ರದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆದರೂ ಕೂಡ ಎನ್ಐಟಿಕೆ ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದು, ಈ ವೇಳೆ ಪೊಲೀಸರು ಮದ್ಯಪ್ರವೇಶಿಸಿ ಅವರಿಗೆ ಎಚ್ಚರಿಕೆ ನೀಡಿರುವ ಘಟನೆ ನಡೆದಿದೆ.
ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ್ದು, ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಅವರು 20708 ಮತಗಳ ಮುನ್ನಡೆ ಸಾಧಿಸಿರುವ ಹಿನ್ನೆಲೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇನ್ನು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಮತ ಎಣಿಕಾ ಕೇಂದ್ರಕ್ಕೆ ಆಗಮಿಸಿ ಕಾರ್ಯಕರ್ತರಿಗೆ ವ್ಯವಸ್ಥೆ ಸರಿಯಾಗಿದೆಯೋ ಎನ್ನುವ ಕುರಿತು ಪರಿಶೀಲನೆ ನಡೆಸಿ ತೆರಳಿದ್ದಾರೆ ಎನ್ನಲಾಗಿದೆ.
ಇನ್ನು, ಸುರತ್ಕಲ್ನ ಎನ್ಐಟಿಕೆ ಭದ್ರತಾ ಕೊಠಡಿಯಲ್ಲಿ ಮತ ಎಣಿಕಾ ಕಾರ್ಯ ನಡೆಯುತ್ತಿದ್ದು, ಬಿಗಿ ಭದ್ರತೆಯೊಂದಿಗೆ ಮತ ಎಣಿಕಾ ಕಾರ್ಯ ಮುಂದುವರಿದಿದೆ. ಚುನಾವಣಾಧಿಕಾರಿ ಹೊರತುಪಡಿಸಿ 8 ಸಹಾಯಕ ಚುನಾವಣಾಧಿಕಾರಿ, ಮೇಲ್ವಿಚಾರಕ, ಇಬ್ಬರು ಸಹಾಯಕರು, ಮೈಕ್ರೋ ವೀಕ್ಷಕ ಹಾಗೂ ಡಿ ಗ್ರೂಪ್ ನವರು ಚುನಾವಣಾ ಮತ ಎಣಿಕೆ ಕಾಯದಲ್ಲಿ ತೊಡಗಿದ್ದಾರೆ. ಇವಿಎಂ, ಅಂಚೆ ಮತ ಪತ್ರ ಸೇರಿದಂತೆ ಒಟ್ಟು 554 ಸಿಬ್ಬಂದಿಗಳು ಮತ ಎಣಿಕಾ ಕೇಂದ್ರದಲ್ಲಿ ಕೆಲಸ ನಿವಹಿಸುತ್ತಿದ್ದಾರೆ. ಭದ್ರತಾ ವ್ಯವಸ್ಥೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 850 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ಮತ ಎಣಿಕಾ ಕೇಂದ್ರದಲ್ಲಿ ಪ್ರವೇಶಿಸಲು ಅನುಮತಿ ನೀಡಲಾಗಿದೆ.
