
ಉಡುಪಿ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ.
2022 ಹಾಗೂ 2023ರಲ್ಲಿ ಎರಡು ಬಾರಿ ಆರೋಪಿಯು ಸಂತ್ರಸ್ತೆಯನ್ನು ಪುಸಲಾಯಿಸಿ ಆಕೆಯ ಮನೆಯಿಂದ ಮುರ್ಡೇಶ್ವರಕ್ಕೆ ಕರೆಸಿಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿದ್ದ ಬಗ್ಗೆ ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ತನಿಖೆ ನಡೆಸಿದ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಜಯಾನಂದ ಕೆ. ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಆದರೆ ಪ್ರಾಸಿಕ್ಯೂಷನ್ ಆರೋಪವನ್ನು ರುಜುವಾತುಪಡಿಸಲು ಸಾಧ್ಯವಾಗದ ಕಾರಣ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ.
ನ್ಯಾಯಾಲಯ ಒಟ್ಟು 28 ಸಾಕ್ಷಿಗಳನ್ನು ಈ ಪ್ರಕರಣದಲ್ಲಿ ವಿಚಾರಣೆ ಮಾಡಿದ್ದು, ಒಟ್ಟು 38 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು. ಆರೋಪಿಯ ಪರವಾಗಿ ಉಡುಪಿಯ ನ್ಯಾಯವಾದಿ ಪ್ರಸಾದ್ ಕುಮಾರ್ ಶೆಟ್ಟಿ ವಾದ ಮಂಡಿಸಿದರು.
ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.
