ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಂಗ ಬಂಧನ ಮುಗಿದಿದ್ದರಿಂದ ವಿಡಿಯೋ ಕಾನ್ಫರನ್ಸ್ ಮೂಲಕ ಆರೋಪಿಗಳ ವಿಚಾರಣೆ ನಡೆಸಲಾಯಿತು. ಈ ವೇಳೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18 ರವರೆಗೆ ವಿಸ್ತರಿಸಿ ಗುರುವಾರ ಕೋರ್ಟ್ ಆದೇಶ ಹೊರಡಿಸಿದೆ.
ತುಮಕೂರು ಹಾಗೂ ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳ ವಿಚಾರಣೆ ನಡೆಸಲಾಗಿದೆ. ಈ ವೇಳೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.
ಇನ್ನು, ದರ್ಶನ್ ಗೌಡ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿರುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿನ ಶೆಡ್ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ, ಹತ್ಯೆ ನಡೆಸಲಾಗಿತ್ತು. ಈ ಹಿನ್ನೆಲೆ ನಟ ದರ್ಶನ್ ಸೇರಿ ಒಟ್ಟು 18 ಮಂದಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಈ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಗೊಂಡಿದೆ.
