
ಉಡುಪಿ: 15 ವರ್ಷಗಳ ಹಿಂದೆ ನಡೆದಿದ್ದ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿ ಅತುಲ್ ರಾವ್ ಖುಲಾಸೆಗೊಂಡಿದ್ದಾರೆ. ಉಡುಪಿ ಜಿಲ್ಲಾ ಎರಡನೇ ಹೆಚ್ಚುವರಿ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿ ಬುಧವಾರ ಆದೇಶ ನೀಡಿದೆ.
ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಅತುಲ್ ರಾವ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಸಿಓಡಿ ಅಧಿಕಾರಿಗಳು ಆರೋಪಿ ವಿರುದ್ಧ ಚಾರ್ಟ್ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬಳಿಕ ನವೆಂಬರ್ 10 2023ರಂದು ಆರೋಪಿ ಅತುಲ್ಗೆ ಒಂದು ವರ್ಷ ಜೈಲು ಶಿಕ್ಷೆ ನೀಡಿಉಡುಪಿ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದನ್ನ ಪ್ರಶ್ನಿಸಿ ಅತುಲ್ ಜಿಲ್ಲಾ ನ್ಯಾಯಾಲಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಆರೋಪಿ ಅತುಲ್ ರಾವ್ ಅವರನ್ನು ಖುಲಾಸೆಗೊಳಿಸಿ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ದಿನೇಶ್ ಹೆಗ್ಡೆ ಆದೇಶ ನೀಡಿದ್ದಾರೆ.
ಘಟನೆ ಹಿನ್ನೆಲೆ: 2008 ಜೂನ್ 10ರಂದು ರಘುಪತಿ ಭಟ್ ಅವರ ಹೆಂಡತಿ ಪದ್ಮಪ್ರಿಯ ಮನೆಯಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ ಅತುಲ್ ರಾವ್ ಅವರ ಮೇಲೆ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿರುವ ಬಗ್ಗೆ ಆರೋಪಿ ಅವರ ವಿರುದ್ಧ ಅದೇ ವರ್ಷ ಜೂನ್.19ರಂದು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
