ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯವಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನಮ್ಮ ಕಟ್ಟಾಳು ಎಂದು ಟಿಕೆಟ್ ವಂಚಿತ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಅವರು ಎ. 9ರಂದು ಮಾಧ್ಯಮಗಳೊಂದಿಗೆ ಮಾತನಾಡಿ, ಈಶ್ವರಪ್ಪ ಅವರು ನಮ್ಮ ಕಟ್ಟಾಳು. ಇಡೀ ರಾಜ್ಯದಲ್ಲಿ ಬಿಜೆಪಿ ಬೆಳವಣಿಗೆಗೆ ಕಾರಣರಾದವರು. ಸಹಜವಾಗಿಯೇ ತನ್ನ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಹಿರಿಯರು ಅವರ ಜೊತೆ ಮಾತನಾಡುತ್ತಾರೆ. ಇದು ವಿಚಾರಧಾರೆಗಳ ನಡುವಿನ ಚುನಾವಣೆಯಾಗಿದೆ. ಇಲ್ಲಿ ಜಾತಿ ರಾಜಕೀಯ ಇಲ್ಲ. ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟವಾಗಿದೆ ಎಂದರು.
ಈ ಸಂದರ್ಭದಲ್ಲಿ ದಿಂಗಾಲೇಶ್ವರ ಶ್ರೀಗಳ ವಿವಾದದ ಕುರಿತು ಮಾತನಾಡಿ, ಚುನಾವಣೆ ಬಂದಾಗ ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ದಿಂಗಾಲೇಶ್ವರ ಸ್ವಾಮಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಇದರ ಲಾಭ ಪಡೆಯುತ್ತಿದೆ ಎಂದರೆ ಆ ಪಕ್ಷದ ವೈಫಲ್ಯತೆ ಕಾಣುತ್ತದೆ. ಅಭ್ಯರ್ಥಿ ಇಲ್ಲದ ಕಾರಣ ಇದ್ದಬದ್ದವರ ಕೈಕಾಲು ಹಿಡಿಯುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯವಾದ ಸ್ಥಿತಿಯಲ್ಲಿದೆ. ಅಧಿಕಾರ ಇದ್ದರೂ ಲೋಕಸಭಾ ಚುನಾವಣೆ ಗೆಲ್ಲಲು ಆಗುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗೆಲ್ಲುತ್ತದೆ. ಹಾಗಾಗಿ, ಕಾಂಗ್ರೆಸ್ ಅಭ್ಯರ್ಥಿ ಹುಡುಕಾಟದಲ್ಲಿದೆ ಎಂದರು.
