
ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಫುಡ್ ಡೆಲಿವರಿ ಬಾಯ್ ಗೆ ಡಿಕ್ಕಿ ಹೊಡೆದು ಬಳಿಕ ಕಾರು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಲು ಯತ್ನಿಸಿದಾಗ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಮೈಸೂರು ರಸ್ತೆ ನಾಯಂಡಹಳ್ಳಿ ಸಮೀಪ ನಡೆದಿದೆ. ಅಪಘಾತದಲ್ಲಿ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ನಿವಹಿಸುತ್ತಿದ್ದ ಹೆಚ್.ಡಿ.ಕೋಟೆ ಮೂಲದ ಪ್ರಸನ್ನ ಕುಮಾರ್ ಎಂದು ಗುರುತಿಸಲಾಗಿದೆ.
ತಡ ರಾತ್ರಿ ಪಾರ್ಟಿ ಮುಗಿಸಿಕೊಂಡು ವೇಗವಾಗಿ ಬಂದ ಕಾರು ನಾಯಂಡಹಳ್ಳಿ ಸಮೀಪ ಮುಂದೆ ಹೋಗುತ್ತಿದ್ದ ಬೈಕ್ ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಆತನ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದುರ್ಘಟನೆ ಬಳಿಕವೂ ಕಾರು ನಿಲ್ಲಿಸದೇ ತೆರಳಿದ ಕಾರು ಚಾಲಕನನ್ನು ಬೆನ್ನತ್ತಿ ಹೋದ ಸ್ಥಳೀಯರು ಆತನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಳಿಕ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಶವವನ್ನು ಮರೋಣತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
