
ಬೆಂಗಳೂರು: ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಐಐಎಸ್ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ (SC/ST Atrocities Act) ಪ್ರಕರಣ ದಾಖಲು ಮಾಡಲಾಗಿದೆ.
ಬೋವಿ ಸಮುದಾಯಕ್ಕೆ ಸೇರಿದ ದೂರುದಾರ ದುರ್ಗಪ್ಪ ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದರು.
2014 ರಲ್ಲಿ ತನ್ನನ್ನು ಹನಿ ಟ್ರ್ಯಾಪ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ವಜಾ ಮಾಡಲಾಗಿದೆ. ಅಷ್ಟೇ ಅಲ್ಲದೇ ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008 ರಿಂದ 2025ರ ವರೆಗೆ ಜಾತಿನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ದೂರು ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದನ್ ರಂಗರಾಜನ್, ರಂಗರಾಜನ್ ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಹೇಮಲತಾ ಮಹಿತಿ, ಚಟ್ಟೋಪಾಧ್ಯಾಯ ಕೆ. ಪ್ರದೀಪ್ ಡಿ.ಸಾವರ್ ಮತ್ತು ಮನೋಹರನ್ ಮತ್ತಿತರರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
ಕ್ರಿಸ್ ಗೋಪಾಲಕೃಷ್ಣನ್ ಅವರು ಐಎಸ್ಸಿಯ ಟ್ರಸ್ಟಿ ಬೋರ್ಡ್ ಸದಸ್ಯರಾಗಿರುವ ಕಾರಣ ಅವರ ಮೇಲೂ ಕೇಸ್ ದಾಖಲಾಗಿದೆ.
ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
