
ಮಂಗಳೂರು: ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್ ಚಟದಲ್ಲಿ ಭಾಗಿಯಾಗಿರುವುದು ಕಳವಳಕಾರಿ. ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ನಿಷೇಧಿಸಲು ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಶಾಲಾ ಮಟ್ಟದಲ್ಲಿಯೇ ಆಂತರಿಕವಾಗಿ ನೋಡಲ್ ಆಫೀಸರ್, ಆಪ್ತ ಸಮಾಲೋಚಕರನ್ನು ನೇಮಿಸಿ ವಿದ್ಯಾರ್ಥಿಗಳ ಚಲನವಲನಗಳನ್ನು ಗಮನಿಸಬೇಕು. ಡ್ರಗ್ಸ್ ವ್ಯಸನಿಯಾಗಿದ್ದಲ್ಲಿ ಆಪ್ತ ಸಮಾಲೋಚನೆಯನ್ನು ಮಾಡಿ ವಿದ್ಯಾರ್ಥಿಗಳ ಮನಃಪರಿವರ್ತಿಸಬೇಕು ಎಂದರು.
ವಿದ್ಯಾರ್ಥಿಗೆ ಯಾವ ಮೂಲದಿಂದ ಡ್ರಗ್ ಸಿಗುತ್ತಿದೆ ಎಂಬ ಬಗ್ಗೆ ಹೆಚ್ಚಿನ ತನಿಖೆಗೆ ಪೊಲೀಸರಿಗೆ ಮಾಹಿತಿ ನೀಡ ಬೇಕು. ಶಾಲಾ ಕಾಲೇಜುಗಳ ಹೆಸರಿಗೆ ಧಕ್ಕೆ ಉಂಟಾಗಬಹುದು ಎಂದು ಪ್ರಕರಣವನ್ನು ಮುಚ್ಚಿಡಬಾರದು ಎಂದರು.
ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯುತ್ತಿದ್ದಾರೆಯೇ ಎಂಬ ಬಗ್ಗೆ ಅರಣ್ಯ ಇಲಾಖೆ ಯವರು ತಪಾಸಣೆ ನಡೆಸಬೇಕು. ವಾಟ್ಸ್ ಆ್ಯಪ್ ಗ್ರೂಪ್ಗ್ಳನ್ನು ರಚಿಸಿ, ವೇಳಾಪಟ್ಟಿ ರಚಿಸಿ ಡ್ರಗ್ಸ್ ನಿರ್ಮೂಲನೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಿ ಕಾರ್ಯರೂಪಕ್ಕೆ ತರಬೇಕು ಅವರು ಅಧಿಕಾರಿಗಳಿಗೆ ತಿಳಿಸಿದರು.
ಬಸ್ಗಳಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸುವ ಬಿತ್ತಿ ಪತ್ರಗಳನ್ನು ಅಂಟಿಸಬೇಕು. ಸಹಾಯವಾಣಿ ಸಂಖ್ಯೆ ನಂಬರ್ 1933 ಅನ್ನು ಅದರಲ್ಲಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
