Home ಸುದ್ದಿಗಳು ಬಾಣಂತಿಯರ ಸಾವಿನ ವಿಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್​ಡಿಕೆ

ಬಾಣಂತಿಯರ ಸಾವಿನ ವಿಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್​ಡಿಕೆ

0
ಬಾಣಂತಿಯರ ಸಾವಿನ ವಿಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್​ಡಿಕೆ

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ. ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿರುವ ರೋಗಗ್ರಸ್ತ ಸರ್ಕಾರವಿದು ಎಂದಿದ್ದಾರೆ.

ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ.

ರಾಜ್ಯದಲ್ಲಿ ಸರಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ. ಕಳಪೆ ಗ್ಲೂಕೋಸ್, ಔಷಧಗಳಿಂದ ಗೃಹಲಕ್ಷ್ಮೀಯರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಆಸ್ಪತ್ರೆಯಲ್ಲಿ IV ದ್ರಾವಣ, ಅಂದರೆ; ರಿಂಗರ್ ಲ್ಯಾಕ್ಟೇಟ್ ದ್ರಾವಣ (Ringer lactate infusion) ಪಡೆದ ಎರಡೇ ಗಂಟೆಯಲ್ಲಿ 9 ಬಾಣಂತಿಯರು ಅಸ್ವಸ್ಥರಾಗಿದ್ದರೆನ್ನುವುದು ಕಳವಳಕಾರಿ. ಹಾಗಾದರೆ, ಈ ದ್ರಾವಣ ಪೂರೈಸಿದ ಕಂಪನಿ ಯಾವುದು? ಅದು ಯಾರದ್ದು?

ಅನೇಕ ದಿನಗಳಿಂದ ಕಳಪೆ ಗ್ಲೂಕೋಸ್, ಔಷಧ ಪೂರೈಕೆ ಆಗುತ್ತಿದ್ದರೂ ಸರಕಾರ ಏನು ಮಾಡುತ್ತಿತ್ತು? ಇಷ್ಟು ಸೂಕ್ಷ್ಮ ವಿಚಾರವನ್ನು ಆರೋಗ್ಯ ಸಚಿವರು ಅಲಕ್ಷ್ಯ ಮಾಡಿದ್ದೇಕೆ? ಸಚಿವರಿಗೆ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಗೊತ್ತೇ ಇರಲಿಲ್ಲವೇ?

ನನ್ನ ತಪ್ಪಿದ್ದರೆ ರಾಜೀನಾಮೆ ಕೊಡುವೆ ಎಂಬ ಸಚಿವರ ಹೇಳಿಕೆ ಅನಪೇಕ್ಷಿತ. ಜವಾಬ್ದಾರಿ ಕೊಟ್ಟಿರುವುದು ಕೈ ತೊಳೆದುಕೊಂಡು ಪಾರಾಗಲಿಕ್ಕಲ್ಲ. ಅಗತ್ಯವಿರುವುದು ರೋಗಗ್ರಸ್ತ ಆರೋಗ್ಯ ಇಲಾಖೆಗೆ ಸೂಕ್ತ ಚಿಕಿತ್ಸೆ. ಪಲಾಯನಕ್ಕಿಂತ ಪ್ರಾಯಶ್ಚಿತ್ತ ಮುಖ್ಯ. ಇಲಾಖೆಯನ್ನು ಸರಿ ಮಾಡುವುದು ಅವರ ಹೊಣೆ. ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ.

ಈ ಮರಣಗಳಿಂದ ಸರಕಾರ ನುಣಚಿಕೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್’ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಹದಗೆಟ್ಟ ಆರೋಗ್ಯ ವ್ಯವಸ್ಥೆಯನ್ನು ಹಳಿಗೆ ತರುವ ಕೆಲಸ ತುರ್ತಾಗಿ ಆಗಬೇಕು ಎಂದು ಪೋಸ್ಟ್ ಮಾಡಿದ್ದಾರೆ.

 

LEAVE A REPLY

Please enter your comment!
Please enter your name here