
ಬೆಂಗಳೂರು: ಗ್ರಾಹಕರ ಕಣ್ಣಲ್ಲಿ ನೀರು ತರಿಸಲು ಈರುಳ್ಳಿ ಮತ್ತೆ ತಯಾರಾಗಿದೆ. ಹೌದು ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆಯಾಗುತ್ತಿದೆ.
ಕಳೆದ ವಾರ ಕೆ.ಜಿಗೆ 50ರಿಂದ 60 ರೂ.ಯಿದ್ದ ಈರುಳ್ಳಿ ಬೆಲೆ ಇದೀಗ ದಿಢೀರ್ ಹೆಚ್ಚಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ.
ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ರಾಜ್ಯಕ್ಕೆ ಪೂರೈಕೆಯಾಗುತ್ತಿತ್ತು. ಆದರೀಗ ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗಿದ್ದು, ಮಳೆಗೆ ಈರುಳ್ಳಿ ಕೊಳೆತು ಹೋಗುತ್ತಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಕಡಿಮೆಯಾಗಿದ್ದು, ಇದೆ ಕಾರಣಕ್ಕೆ ಈರುಳ್ಳಿ ಬೆಲೆ ಹೆಚ್ಚಾಗಿದೆ.
ಸದ್ಯ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ಪೂರೈಕೆಯಾಗುತ್ತಿದ್ದು, ದಸರಾ ಉತ್ಸವದ ವೇಳೆಗೆ ಈರುಳ್ಳಿ ದರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
