
ಉಡುಪಿ: ಬಾಂಗ್ಲಾ ದೇಶದ ಅಕ್ರಮ ವಲಸಿಗರ ಜಾಲದ ಕುರಿತು ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ ನಡೆಸುವಂತೆ ಶಾಸಕ ಯಶ್ಪಾಲ್ ಸುವರ್ಣ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಕರಾವಳಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಾಂಗ್ಲಾದೇಶೀ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಬಗ್ಗೆ ಪೊಲೀಸ್ ಇಲಾಖೆಯ ತನಿಖೆಯಲ್ಲಿ ಕಂಡುಬಂದಿದ್ದು, ಇದರಿಂದ ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶೀಯರನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್ಐಎ ಮೂಲಕ ತನಿಖೆ ನಡೆಸಬೇಕು.
ಅಕ್ರಮ ವಲಸಿಗರಿಗೆ ಸಹಕಾರ ನೀಡುವ ಜಾಲವೂ ಕರಾವಳಿಯಲ್ಲಿ ಕಾರ್ಯಾಚರಿಸುತ್ತಿರುವ ಗುಮಾನಿ ಇದ್ದು, ಬಂಧಿತರು ಈಗಾಗಲೇ ನಕಲಿ ಆಧಾರ್ ಕಾರ್ಡ್, ಪಾಸ್ಪೋರ್ಟ್ ಹೊಂದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಉನ್ನತ ಮಟ್ಟದ ತನಿಖೆ ಮಾಡಿ ರಾಷ್ಟ್ರೀಯ ಭದ್ರತೆಗೆ ಧಕ್ಕೆತರುವ ದೇಶ ವಿರೋಧಿ ಚಟುವಟಿಕೆಗಳಿಗೆ ಸಹಕಾರ ನೀಡುವ ಶಕ್ತಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಪತ್ರದಲ್ಲಿ ಮನವಿ ಮಾಡಿದ್ದಾರೆ.
